Categories
ಬ್ಯಾಡ್ಮಿಂಟನ್

ವಿಶ್ವ ಚಾಂಪಿಯನ್‌ಷಿಪ್‌ ನಲ್ಲಿ ಚಿನ್ನದ ಪದಕ ಜಯಿಸುವ ಕನಸು : ಬ್ಯಾಡ್ಮಿಂಟನ್‌ ತಾರೆ ಪಿ.ವಿ.ಸಿಂಧು

ಭಾರತದ ಪ್ರಮುಖ ಬ್ಯಾಡ್ಮಿಂಟನ್‌ ತಾರೆ ಪಿ.ವಿ.ಸಿಂಧು, ಸೋಮವಾರದಿಂದ ನಡೆಯುವ ವಿಶ್ವ ಚಾಂಪಿಯನ್‌ಷಿಪ್‌ ನಲ್ಲಿ ಚಿನ್ನದ ಪದಕ ಜಯಿಸುವ ಕನಸು ಹೊಂದಿದ್ದಾರೆ.41 ವರ್ಷಗಳ ಇತಿಹಾಸವಿರುವ ಈ ಚಾಂಪಿಯನ್‌ಷಿಪ್‌ನಲ್ಲಿ ಭಾರತ ಎಂಟು ಪದಕಗಳನ್ನು ಗೆದ್ದಿದೆ. ಆದರೆ ಚಿನ್ನ ಮಾತ್ರ ಕೈಗೆಟುಕದಾಗಿದೆ.

ಈ ಕೊರಗನ್ನು ಸಿಂಧು ದೂರ ಮಾಡುವ ನಿರೀಕ್ಷೆ ಗರಿಗೆದರಿದೆ. 24ರ ಹರೆಯದ ಈ ಆಟಗಾರ್ತಿ ಹಿಂದಿನ ಎರಡು ಆವೃತ್ತಿಗಳಲ್ಲಿ ಬೆಳ್ಳಿಯ ಪದಕ ಗೆದ್ದಿದ್ದರು. ಚಾಂಪಿಯನ್‌ಷಿಪ್‌ನಲ್ಲಿ ಐದನೇ ಶ್ರೇಯಾಂಕ ಹೊಂದಿರುವ ಅವರಿಗೆ ಮೊದಲ ಸುತ್ತಿನಲ್ಲಿ ‘ಬೈ’ ಲಭಿಸಿದೆ. ಎರಡನೇ ಸುತ್ತಿನಲ್ಲಿ ಸಿಂಧು, ಚೀನಾ  ತೈಪೆಯ ಪಾಯಿ ಯು ಪೊ ಅಥವಾ ಬಲ್ಗೇರಿಯಾದ ಲಿಂಡಾ ಜೆತ್‌ಚಿರಿ ಎದುರು ಸೆಣಸಲಿದ್ದಾರೆ.

ಎಂಟನೇ ಶ್ರೇಯಾಂಕದ ಆಟಗಾರ್ತಿ ಸೈನಾ ನೆಹ್ವಾಲ್‌ ಕೂಡ ಪದಕದ ವಿಶ್ವಾಸದಲ್ಲಿದ್ದಾರೆ. ಸೈನಾ, ಚಾಂಪಿಯನ್‌ ಷಿಪ್‌ನಲ್ಲಿ ಒಂದು ಬೆಳ್ಳಿ ಮತ್ತು ಕಂಚಿನ ಪದಕ ಗೆದ್ದಿದ್ದಾರೆ. ಅವರಿಗೂ ಮೊದಲ ಸುತ್ತಿನಲ್ಲಿ ‘ಬೈ’ ಸಿಕ್ಕಿದೆ.

ಪುರುಷರ ಸಿಂಗಲ್ಸ್‌ನಲ್ಲಿ ಕಿದಂಬಿ ಶ್ರೀಕಾಂತ್‌ ಮೇಲೆ ಹೆಚ್ಚಿನ ಭರವಸೆ ಇಡಲಾಗಿದೆ. ಈ ವರ್ಷದ ಮಾರ್ಚ್‌ನಲ್ಲಿ ನಡೆದಿದ್ದ ಇಂಡಿಯಾ ಓಪನ್‌ನಲ್ಲಿ ಅವರು ಫೈನಲ್‌ ಪ್ರವೇಶಿಸಿದ್ದರು.

ಮೊದಲ ಸುತ್ತಿನಲ್ಲಿ ಶ್ರೀಕಾಂತ್‌ಗೆ ಐರ್ಲೆಂಡ್‌ನ ನಾಹಟ್‌ ನಜುಯೆನ್‌ ಸವಾಲು ಎದುರಾಗಲಿದೆ. ಸಮೀರ್‌ ವರ್ಮಾ ಅವರು ಸಿಂಗಪುರದ ಲೊಹ್‌ ಕೀನ್‌ ಯೀವ್‌ ಎದುರು ಆಡುವ ಮೂಲಕ ಅಭಿಯಾನ ಆರಂಭಿಸಲಿದ್ದಾರೆ. ಬಿ.ಸಾಯಿ ಪ್ರಣೀತ್‌ ಮತ್ತು ಎಚ್‌.ಎಸ್‌.ಪ್ರಣಯ್‌ ಅವರೂ ಪದಕದ ಮೇಲೆ ಕಣ್ಣಿಟ್ಟಿದ್ದಾರೆ.

ಮಹಿಳಾ ಡಬಲ್ಸ್‌ನಲ್ಲಿ ಅಶ್ವಿನಿ ಪೊನ್ನಪ್ಪ ಮತ್ತು ಎನ್‌.ಸಿಕ್ಕಿ ರೆಡ್ಡಿ ಅವರ ಮೇಲೆ ವಿಶ್ವಾಸ ಇಡಲಾಗಿದೆ. ಕನ್ನಡತಿ ಅಶ್ವಿನಿ, ಮಿಶ್ರ ಡಬಲ್ಸ್‌ನಲ್ಲೂ ಆಡುತ್ತಿದ್ದಾರೆ.

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

one × 2 =